ಶನಿವಾರ, ಸೆಪ್ಟೆಂಬರ್ 23, 2017

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ
ಹೊಸ ತಾಲೂಕು ರಚನೆ: ಅ.3 ರೊಳಗೆ ವಿವರ ಸಲ್ಲಿಸಲು ಸೂಚನೆ
ಯಾದಗಿರಿ: ಸೆಪ್ಟೆಂಬರ್ 18, (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಹೊಸದಾಗಿ ಗುರುಮಠಕಲ್, ವಡಗೇರಾ ಹಾಗೂ ಹುಣಸಗಿ ತಾಲೂಕು ಕೇಂದ್ರಗಳನ್ನು ರಚಿಸುವ ಕುರಿತು ಅಗತ್ಯ ಕಚೇರಿ, ಸಿಬ್ಬಂದಿಗಳನ್ನೊಳಗೊಂಡ ಮಾಹಿತಿಯನ್ನು ಅಕ್ಟೋಬರ್ 3ರೊಳಗಾಗಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಾದ ಶ್ರೀ ಮಂಜುನಾಥ ಜೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹೊಸ ತಾಲೂಕು ರಚನೆಗೆ ಕಚೇರಿ ಕಟ್ಟಡ, ಸಿಬ್ಬಂದಿ ಹಾಗೂ ಮೂಲಭೂತ ಸೌಕರ್ಯಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ತಾಲೂಕು ರಚನೆಯಲ್ಲಿ ಸರ್ಕಾರ ಸೂಚಿಸಿರುವ ಮಾನದಂಡಗಳನ್ನು ಅನುಸರಿಸಿ ಅಗತ್ಯವಿರುವ ಕಚೇರಿಗಳನ್ನು ಆರಂಭ ಮಾಡುವ ಕುರಿತು ಚರ್ಚಿಸಲಾಯಿತು.
ನೂತನ ತಾಲೂಕು ಕೇಂದ್ರಗಳಿಲ್ಲಿ ಅಗತ್ಯವಿರುವ ಕಚೇರಿಗಳನ್ನು ಪ್ರಾರಂಭಿಸಲು ವಿವಿಧ ಇಲಾಖೆಗಳಿಗೆ ಬೇಕಿರುವ ಕಟ್ಟಡಗಳನ್ನು ಬಾಡಿಗೆ ಅಥವಾ ಸ್ವಂತ ಕಟ್ಟಡದಲ್ಲಿ ಜನವರಿಯಲ್ಲಿ ಪ್ರಾರಂಭಿಸಬೇಕಿದೆ ಎಂದು ಅವರು ಹೇಳಿದರು.
ಪ್ರಮುಖವಾಗಿ ತಾಲೂಕು ಪಂಚಾಯತಿ ಕಾರ್ಯಾಲಯ, ತಹಸೀಲ್ದಾರರು, ಕೃಷಿ, ತೋಟಗಾರಿಕೆ, ಆರೋಗ್ಯ, ಶಿಕ್ಷಣ, ಕೈಗಾರಿಕೆ, ಕಾರ್ಮಿಕ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಇಲಾಖೆ, ಸಮಾಜ ಕಲ್ಯಾಣ, ಅರಣ್ಯ ಹಾಗೂ ಆಹಾರ ಸುರಕ್ಷತಾ ಇಲಾಖೆಯ ಕಚೇರಿಗಳಿಗೆ ಕಟ್ಟಡಗಳನ್ನು ಪಡೆಯಲು ಅವರು ಸೂಚಿಸಿದರು. ಬಾಡಿಗೆಗೆ ಪಡೆಯುವ ಕಟ್ಟಡಗಳು ಶೌಚಾಲಯದಂತ ಮೂಲ ಸೌಕರ್ಯಗಳನ್ನು ಹೊಂದಿರಬೇಕು ಎಂದು ಅವರು ತಿಳಿಸಿದರು.
ಈಗಾಗಲೇ ಗುರುಮಠಕಲ್‍ನಲ್ಲಿ ಪಶು, ಗ್ರಂಥಾಲಯ, ರೇಷ್ಮೆ ಹಾಗೂ ಆರೋಗ್ಯ ಇಲಾಖೆಯ ಸ್ವಂತ ಕಟ್ಟಡಗಳಿದ್ದು, ತಾಲೂಕು ಕಚೇರಿಗಳನ್ನು ಪ್ರಾರಂಭಿಸಲು ಅಗತ್ಯ ತಯಾರಿ ಕೈಗೊಳ್ಳಲು ಸೂಚಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಚೇರಿ ಕಾರ್ಯಾರಂಭ ಮಾಡಿರುವ ಕುರಿತು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ವಡಗೇರಾ ಮತ್ತು ಹುಣಸಗಿಯಲ್ಲಿ ಕಟ್ಟಡಗಳನ್ನು ಪಡೆಯುವಂತೆ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಯಾದಗಿರಿ, ಸುರಪೂರ ಹಾಗೂ ಶಹಾಪೂರ ತಾಲೂಕಿನಲ್ಲಿ ವಿವಿಧ ಇಲಾಖೆಗಳಿಗೆ ಅಗತ್ಯವಿರುವ ಜಮೀನುಗಳ ಕುರಿತು ಸಭೆಯಲ್ಲಿ ಮಾಹಿತಿ ಪಡೆಯಲಾಯಿತು.
ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಪ್ರಭಾರಿ ಅಪರ ಜಿಲ್ಲಾಧಿಕಾರಿಗಳಾದ ಡಾ.ಜಗದೀಶ್ ಕೆ.ನಾಯಕ್, ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ವಸಂತರಾವ ಕುಲಕರ್ಣಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ 3 ತಾಲೂಕಿನ ತಹಸೀಲ್ದಾರರು, ವಿಶೇಷ ತಹಸೀಲ್ದಾರರು ಸಭೆಯಲ್ಲಿ ಹಾಜರಿದ್ದರು.

ಮಂಗಳವಾರ, ಸೆಪ್ಟೆಂಬರ್ 12, 2017

 ದ್ವೀಪ ಗ್ರಾಮಕ್ಕೆ ಜಿಲ್ಲಾಧಿಕಾರಿ ಶ್ರೀ ಜೆ. ಮಂಜುನಾಥ್ ಭೇಟಿ
ನೀಲಕಂಠರಾಯನಗಡ್ಡಿಗೆ ಸಕಲ ಸೌಕರ್ಯ ಕಲ್ಪಿಸಿ ಅಭಿವೃದ್ಧಿ ಪಡಿಸುವ ಭರವಸೆ
ಯಾದಗಿರಿ: ಸೆಪ್ಟಂಬರ್ 11, (ಕರ್ನಾಟಕ ವಾರ್ತೆ): ಸುರಪುರ ತಾಲೂಕಿನ ದ್ವೀಪ ಗ್ರಾಮ ನೀಲಕಂಠರಾಯನಗಡ್ಡಿ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಶ್ರೀ ಜೆ. ಮಂಜುನಾಥ್ ಅವರು, ಗ್ರಾಮಕ್ಕೆ ಅಗತ್ಯ  ಮೂಲಭೂತ ಸೌಲಭ್ಯ ಕಲ್ಪಿಸುವುದಾಗಿ ಭರವಸೆ ನೀಡಿದ್ದಾರೆ. 
ಸುಮಾರು ಮೂರು ಕಿಲೋ ಮೀಟರ್ ಕಾಲ್ನಡಿಗೆಯಲ್ಲೇ ನೀರಿನ ಮಟ್ಟ ಕಡಿಮೆ ಪ್ರಮಾಣದಲ್ಲಿರುವ ಹೊಳೆಯಲ್ಲಿ ನಡೆದು ಜಿಲ್ಲಾಧಿಕಾರಿಗಳು, ಗ್ರಾಮಸ್ಥರನ್ನು ಭೇಟಿಯಾಗಿ ಸಮಸ್ಯೆಗಳನ್ನು ಆಲಿಸಿದರು.  ಗ್ರಾಮಕ್ಕೆ ಸೇತುವೆ ನಿರ್ಮಾಣಕ್ಕಾಗಿ 1 ಕೋಟಿ 74 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು, ಇದೇ ತಿಂಗಳಲ್ಲಿ ಟೆಂಡರ್ ಕರೆಯಲಾಗುವುದು ಎಂದು ತಿಳಿಸಿದರು.
ಗ್ರಾಮಕ್ಕೆ ಕುಡಿಯುವ ನೀರು, ಅಂಗನವಾಡಿ ಕೇಂದ್ರ, ಹೆಚ್ಚುವರಿ ಶಿಕ್ಷಕರ ನೇಮಕ, ರಸ್ತೆ ಸಂಪರ್ಕ, ಗ್ರಾಮದಲ್ಲಿ ಸಿಸಿ ರಸ್ತೆ ಮುಂತಾದ ಸೌಲಭ್ಯ ಕಲ್ಪಿಸುವುದಾಗಿ ಅವರು ಹೇಳಿದರು.  
ಬಾಕಿ ಇರುವ ನಾಲ್ಕೈದು ವಿದ್ಯುತ್ ಕಂಬಗಳನ್ನು ನೆಟ್ಟು ಗ್ರಾಮಕ್ಕೆ ವಿದ್ಯುತ್ ಸೌಕರ್ಯ ವ್ಯವಸ್ಥೆ ಮಾಡುವುದಾಗಿ ಅವರು ತಿಳಿಸಿದರು.
ಗ್ರಾಮಕ್ಕೆ ಎಲ್ಲಾ ಮೂಲಭೂತ ಸೌಕರ್ಯ ಕಲ್ಪಿಸುವುದರ ಜೊತೆಗೆ ನೀಲಕಂಠರಾಯನಗಡ್ಡಿ ಪ್ರದೇಶವನ್ನು ಮುಂದಿನ ದಿನಗಳಲ್ಲಿ ಪ್ರವಾಸಿ ತಾಣವನ್ನಾಗಿ ಮಾಡಲಾಗುವುದೆಂದು ಅವರು ಘೋಷಿಸಿದರು. 
ಇದೇ ಸಂದರ್ಭದಲ್ಲಿ, ತಮ್ಮ-ತಮ್ಮ ಜಮೀನುಗಳ ಖಾತೆ ಸಮಸ್ಯೆ ಕುರಿತು ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಪೂರ್ವಿಕರ(ಪಿತ್ರಾರ್ಜಿತ) ಹೆಸರಿನಲ್ಲಿರುವ ಜಮೀನುಗಳನ್ನು ತಮ್ಮ ತಮ್ಮ ಹೆಸರಿಗೆ ಖಾತೆ ಮಾಡಿಸಿ ಕೊಡಲಾಗುವುದು. ಈ ಮೂಲಕ ಗ್ರಾಮದ ಜನತೆಗೆ ಎಸ್‍ಸಿಪಿ/ಟಿಎಸ್‍ಪಿ ಯೋಜನೆಯಡಿ ವಿವಿಧ ಸವಲತ್ತು ನೀಡಲಾಗುವುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಗ್ರಾಮದಲ್ಲಿರುವ ಶಾಲೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಶ್ರೀ ಜೆ. ಮಂಜುನಾಥ್ ಅವರು, ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಪರೀಕ್ಷಿಸಿದರು. ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಹಾಗೂ ಹಾಲನ್ನು ಸರಿಯಾಗಿ ನೀಡಲಾಗುತ್ತಿದಿಯೇ ಎಂಬ ಬಗ್ಗೆ ಮಕ್ಕಳಿಂದ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಸುರಪೂರ ತಹಸೀಲ್ದಾರ್ ಶ್ರೀ ಸುರೇಶ್ ಅಂಕಲಗಿ ಹಾಗೂ ಜನಪ್ರತಿನಿಧಿಗಳು ಹಾಜರಿದ್ದರು.

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...