ಬುಧವಾರ, ಡಿಸೆಂಬರ್ 11, 2019

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ
ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಪೂರಕ
-:ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ
ಯಾದಗಿರಿ, ಡಿಸೆಂಬರ್ ೧೧ (ಕರ್ನಾಟಕ ವಾರ್ತೆ): ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳನ್ನು ಹೊರತರಲು ಪೂರಕವಾಗುತ್ತವೆ. ಈ ದಿಸೆಯಲ್ಲಿ ಶಾಲಾ ಶಿಕ್ಷಕರು ಆಸಕ್ತಿ ವಹಿಸಿ, ಮಕ್ಕಳ ಪ್ರತಿಭೆಯನ್ನು ಗುರುತಿಸುವ ಮೂಲಕ ಪ್ರೋತ್ಸಾಹಿಸಬೇಕು ಎಂದು ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಹೇಳಿದರು.
ನಗರದ ಡಾನ್ ಬಾಸ್ಕೋ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಬುಧವಾರ ಜಿಲ್ಲಾ ಪಂಚಾಯಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ೨೦೧೯-೨೦ನೇ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು  ಉದ್ಘಾಟಿಸಿ, ಅವರು ಮಾತನಾಡಿದರು.
ಪ್ರತಿಯೊಂದು ಮಗುವಿನಲ್ಲಿ ಪ್ರತಿಭೆ ಇರುತ್ತದೆ. ಆದರೆ ಅದನ್ನು ಅನಾವರಣ ಮಾಡುವ ಸೂಕ್ತ ವೇದಿಕೆ ಹಾಗೂ ವ್ಯಕ್ತಪಡಿಸುವ ಕಲೆ ಗೊತ್ತಿರುವುದಿಲ್ಲ. ಹಾಗಾಗಿ ಸರ್ಕಾರವು ಮಕ್ಕಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವದಂತಹ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಇದರ ಸದುಪಯೋಗವನ್ನು ಪ್ರತಿ ಮಕ್ಕಳು ಪಡೆದುಕೊಳ್ಳಬೇಕು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು ಎಂದು ಅವರು ಹೇಳಿದರು.
 ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್, ಜಿಲ್ಲಾ ಪಂಚಾಯಿತಿ ಸದಸ್ಯರಾದ ಶಿವಲಿಂಗಪ್ಪ ಪುಟಗಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಭಾರಿ ಉಪನಿರ್ದೇಶಕರಾದ ಡಿ.ಎಮ್.ಹೊಸಮನಿ, ಡಯಟ್ ಪ್ರಾಂಶುಪಾಲರಾದ ಶೀಭಾ, ಡಾನ್ ಬಾಸ್ಕೋ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ಫಾದರ್ ಅಂಟೋನಿ ಫ್ರಾನ್ಸಿಸ್, ಎಸ್‌ಎಸ್‌ಎಲ್‌ಸಿ ಪರೀಕ್ಷೆ ನೋಡಲ್ ಅಧಿಕಾರಿ ಡಾ.ಮಲ್ಲಪ್ಪ ಯರಗೋಳ, ನಿಂಗಪ್ಪ, ಜಿಲ್ಲಾ ನೌಕರರ ಸಂಘದ ಅಧ್ಯಕ್ಷರಾದ ಮಹಿಪಾಲ್‌ರೆಡ್ಡಿ, ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಮೋನಯ್ಯ ಉಪಸ್ಥಿತರಿದ್ದರು.
ರಾಷ್ಟçಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಸರ್ವಜ್ಞ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಮಂಜುನಾಥ ಮೋಹನ್ ರಾಠೋಡ್ ಬೆಳಗೇರಾ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ದೇವಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರೀತಿ ಹಾಗೂ ಸಂಗಡಿಗರು, ಥಾನುನಾಯಕ ತಾಂಡಾದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ನಂದಿನಿ ಹಾಗೂ ಸಂಗಡಿಗರ ಜಾನಪದ ನೃತ್ಯ ಗಮನ ಸೆಳೆದವು.
ಸಂಗೀತ ಶಿಕ್ಷಕರಾದ ಶರಣಬಸವ ವಠಾರ ಹಾಗೂ ಸಂಗಡಿಗರು ನಾಡಗೀತೆ ಹಾಡಿದರು. ಗುರುಮಠಕಲ್‌ನ ಮಲ್ಲಯ್ಯಕಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರು ಪ್ರಾರ್ಥನಾ ಗೀತೆ ಹಾಡಿದರು. ಕಾರ್ಯಕ್ರಮದ ನೋಡಲ್ ಅಧಿಕಾರಿ ವೀರಪ್ಪ ಕನ್ನಳ್ಳಿ ಸ್ವಾಗತಿಸಿದರು. ಯರಗೋಳ ಶಾಲಾ ಶಿಕ್ಷಕರಾದ ಉಮೇಶ್ ಅವರು ಕಾರ್ಯಕ್ರಮ ನಿರೂಪಿಸಿದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...