ಮಂಗಳವಾರ, ಜನವರಿ 14, 2020

ವಾರ್ತಾ ಇಲಾಖೆಯಿಂದ ಮೈಲಾರಲಿಂಗೇಶ್ವರ ಜಾತ್ರೆಯಲ್ಲಿ ಮಳಿಗೆ ಸ್ಥಾಪನೆ
ಸರ್ಕಾರದ ಸಾಧನೆಗಳ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ
ಯಾದಗಿರಿ, ಜನವರಿ ೧೪ (ಕರ್ನಾಟಕ ವಾರ್ತೆ): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ರಾಜ್ಯ ಸರ್ಕಾರದ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಯಾದಗಿರಿ ತಾಲ್ಲೂಕಿನ ಮೈಲಾಪುರದ ಶ್ರೀ ಮೈಲಾರಲಿಂಗೇಶ್ವರ ಜಾತ್ರೆಯ ವಿಶೇಷ ಬಸ್ ನಿಲ್ದಾಣ ಆವರಣದಲ್ಲಿ ಸ್ಥಾಪಿಸಿದ ಛಾಯಾಚಿತ್ರ ಪ್ರದರ್ಶನ ಮಳಿಗೆಯನ್ನು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಸಂತೋಷ ಗೋಗೇರಿ ಅವರು ಜ.೧೪ರ ಮಂಗಳವಾರ ಉದ್ಘಾಟಿಸಿದರು.
 ಶ್ರೀ ಮೈಲಾರಲಿಂಗೇಶ್ವರ ಜಾತ್ರೆಯ ಅಂಗವಾಗಿ ರಾಜ್ಯ ಸರ್ಕಾರದ ಮಹತ್ವದ ಯೋಜನೆಗಳು ಮತ್ತು ಸಾಧನೆಗಳನ್ನು ಪ್ರಚುರಪಡಿಸುವ ನಿಟ್ಟಿನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮೂರು ದಿನಗಳವರೆಗೆ ಪ್ರದರ್ಶನ ಮಳಿಗೆ ಸ್ಥಾಪಿಸಿರುವುದು ಸಾರ್ವಜನಿಕರಿಗೆ ತುಂಬಾ ಅನುಕೂಲವಾಗಲಿದೆ. ಭಕ್ತರು, ಸಾರ್ವಜನಿಕರು ಸರ್ಕಾರದ ಯೋಜನೆಗಳ ಬಗ್ಗೆ ತಿಳಿದುಕೊಳ್ಳಲು ಸಹಕಾರಿಯಾಗಲಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಪ್ರದರ್ಶನದಲ್ಲಿರುವ ವಿವರ: ಪ್ರವಾಹದಲ್ಲಿ ತೊಂದರೆಗೊಳಗಾದ ಕುಟುಂಬಗಳಿಗೆ ತಲಾ ೧೦,೦೦೦ ರೂ. ಪರಿಹಾರ, ಜೀವಹಾನಿ ಕುಟುಂಬಗಳಿಗೆ ತಲಾ ೫ ಲಕ್ಷ ರೂ. ಮತ್ತು ಅಸುನೀಗಿದ ಜಾನುವಾರುಗಳಿಗೆ ೧೬ ರಿಂದ ೩೦ ಸಾವಿರ ರೂ. ಪರಿಹಾರ ನೀಡಲಾಗಿರುವ ಛಾಯಾಚಿತ್ರ. ಸಂಪರ್ಕ ಕಳೆದುಕೊಂಡಿದ್ದ ೧೭೮ ರಸ್ತೆ, ಸೇತುವೆಗಳ ಪೈಕಿ ೧೪೨ ರಸ್ತೆ, ಸೇತುವೆ ಸಂಪರ್ಕಗಳ ಪುನರ್ ಸ್ಥಾಪನೆ ಮಾಡಲಾಗಿದೆ. ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ಕಾಮಗಾರಿ ಕೈಗೊಳ್ಳಲು ೧೫೦೦ ಕೋಟಿ ರೂ. ಬಿಡುಗಡೆ ಮಾಡಿರುವ ಕುರಿತ ಮಾಹಿತಿ ಪ್ರದರ್ಶನದಲ್ಲಿದೆ. ಪ್ರವಾಹ ಸಂತ್ರಸ್ಥರ ನೋವಿಗೆ ಮಿಡಿದ ಸರ್ಕಾರವು ೨೨ ಜಿಲ್ಲೆಗಳ ೧೦೩ ತಾಲ್ಲೂಕು ಪ್ರವಾಹ ಪೀಡಿತ ಪ್ರದೇಶಗಳೆಂದು ಘೋಷಿಸಿ ಕೆಂದ್ರ ಸರ್ಕಾರದಿಂದ ೧೨೦೦ ಕೋಟಿ ರೂ. ಮಧ್ಯಂತರ ಪರಿಹಾರ ಬಿಡುಗಡೆಗೊಳಿಸಿ, ರಾಜ್ಯ ಸರ್ಕಾರದಿಂದ ಪರಿಹಾರ ಕಾರ್ಯಗಳಿಗೆ ೬.೪೫೦ ಕೋಟಿ ರೂ. ಮಂಜೂರು ಮಾಡಿರುವ ಬಗ್ಗೆ.
ಅನ್ನದಾತ ರೈತನ ಹಿತರಕ್ಷಣೆ ಸರಕಾರದ ಮೊದಲ ಆದ್ಯತೆಯಾಗಿದ್ದು, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿಗಳಿಗೆ ಕೇಂದ್ರ ಸರ್ಕಾರದ ವಾರ್ಷಿಕ ೬,೦೦೦ ರೂ. ನೆರವಿನೊಂದಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ೪,೦೦೦ ರೂ.ಗಳ ನೆರವು. ಎರಡು ಕಂತುಗಳಲ್ಲಿ ಹಣ ಬಿಡುಗಡೆ ಮಾಡಲಾಗಿದ್ದು, ಅರ್ಹ ಫಲಾನುಭವಿಗಳ ಖಾತೆಗೆ ನೇರ ವರ್ಗಾವಣೆ ಮಾಡುತ್ತಿರುವ ಛಾಯಾಚಿತ್ರ. ಸುಸ್ಥಿರ ಹಾಗೂ ರಚನಾತ್ಮಕ ಪ್ರವಾಸೋದ್ಯಮ ಅಭಿವೃದ್ಧಿಗೆ ಸರ್ಕಾರದ ಆದ್ಯತೆ. ಹೈದ್ರಾಬಾದ್ ಕರ್ನಾಟಕ ಭಾಗವನ್ನು “ಕಲ್ಯಾಣ ಕರ್ನಾಟಕ”ವೆಂದು ಮರು ನಾಮಕರಣ. ಇದರಿಂದ ಈ ಭಾಗದ ಸಮಗ್ರ ಅಭಿವೃದ್ಧಿ ಮತ್ತು ಜನ ಕಲ್ಯಾಣದ ಪರ್ವಕ್ಕೆ ಚಾಲನೆ. ಕಲ್ಯಾಣ ಕರ್ನಾಟಕ ಭಾಗದ ೨೧ ಹಿಂದುಳಿದ ತಾಲ್ಲೂಕುಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಕಲಬುರಗಿಗೆ ವಿಮಾನ ಸೇವೆ ಪ್ರಾರಂಭ ಮತ್ತು ಪ್ರವಾಸೋದ್ಯಮ, ವಾಣಿಜೋದ್ಯಮ, ರಫ್ತು ಉದ್ಯಮಗಳ ಬೆಳವಣಿಗೆಗೆ ಪ್ರಯೋಜನವಾಗಲಿ ಎನ್ನುವ ಛಾಯಾಚಿತ್ರಗಳಿವೆ.
ರಾಜ್ಯದಲ್ಲಿ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಹೊಸ ಆವಿಷ್ಕಾರಗಳಿಗೆ ಉತ್ತೇಜನ ನೀಡಲು ಕರ್ನಾಟಕ ಆವಿಷ್ಕಾರ ಪ್ರಾಧಿಕಾರ ರಚನೆ ಮಾಡಲಾಗಿದೆ. ಪ್ರಧಾನಮಂತ್ರಿಗಳ ಮಾತೃವಂದನಾ ಯೋಜನೆಯಡಿ ೩ ಕಂತುಗಳಲ್ಲಿ ೫೦೦೦ ರೂ. ಸಹಾಯಧನ, ೯೭೨೪೬ ಫಲಾನುಭವಿಗಳೀಗೆ ಪ್ರಯೋಜನ ೪೪.೬೫ ಕೋಟಿ ರೂ. ನೆರವು ನೀಡಲಾಗಿದೆ. ಪರಿಶಿಷ್ಟ ಜಾತಿಯವರ ಕಲ್ಯಾಣಕ್ಕಾಗಿ ವಿವಿಧ ಕಾರ್ಯಕ್ರಮಗಳ ಅನುಷ್ಠಾನಕ್ಕೆ ೪೨೭ ಕೋಟಿ ರೂ. ವೆಚ್ಚ, ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳಿಗೆ ೨೫೧ ಕೋಟಿ ರೂ. ವೆಚ್ಚ ಮಾಡಲಾಗಿದೆ. ದುಡಿಯುವ ಕೈಗಳಿಗೆ ಉದ್ಯೋಗ ನೀಡುವುದು ಈ ಸರ್ಕಾರದ ಆದ್ಯತೆಗಳಲ್ಲಿ ಒಂದಾಗಿದೆ. ಹೂಡಿಕೆದಾರರನ್ನು ಆಕರ್ಷಿಸಲು ಪೂರಕ ವಾತಾವರಣ ಸೃಷ್ಟಿ ಮಾಡಲಾಗುವುದೆನ್ನುವ ಛಾಯಾಚಿತ್ರ.
ಪ್ರಥಮ ಬಾರಿಗೆ ೧೫೫ ವಿಕಲಚೇತನರ ಶಾಲೆಯ ೧೦ ಸಾವಿರಕ್ಕೂ ಹೆಚ್ಚು ಮಕ್ಕಳಿಗೆ ಕ್ಷೀರಭಾಗ್ಯ ಯೋಜನೆಯಡಿ ಪೌಷ್ಟಿಕಾಂಶಯುಕ್ತ ಹಾಲು ಪೂರೈಕೆ ಮಾಡಿರುವ ಕುರಿತು. ಸಂಕಷ್ಟಕ್ಕೆ ಒಳಗಾಗಿರುವ ನೇಕಾರರ ಆರ್ಥಿಕ ಸಬಲೀಕರಣಕ್ಕೆ ಆದ್ಯತೆ ಒಟ್ಟು ೯೮.೨೯ ಕೋಟಿ ರೂ. ಸಾಲ ಮನ್ನಾ ಮಾಡಿದೆ. ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳಿAದ ಮೀನುಗಾರರು ಪಡೆದಿರುವ ೫೦ ಸಾವಿರ ರೂ. ವರೆಗಿನ ಸಾಲ ಮನ್ನಾ. ರಾಜ್ಯದಲ್ಲಿ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ರಾಜ್ಯದಲ್ಲಿ ೨೩ ಲಕ್ಷ ಆರೋಗ್ಯ ಕಾರ್ಡ್ ವಿತರಣೆ ಮಾಡಿರುವ ಕುರಿತ ಮಾಹಿತಿಯ ಜೊತೆಗೆ ಸರ್ಕಾರ ಅನೇಕ ಜನಪರ ಯೋಜನೆಗಳ ವಿವರ ಛಾಯಾಚಿತ್ರ ಪ್ರದರ್ಶನದಲ್ಲಿದೆ. ಎಸ್‌ಬಿಐ ಆರ್ಥಿಕ ಸಾಕ್ಷರತಾ ಕೇಂದ್ರದ ಕೌನ್ಸಲರ್ ದೇವಿಂದ್ರಪ್ಪ ಮಹಾಮನಿ ಅವರು ಪ್ರಧಾನಮಂತ್ರಿ ಜನ್‌ಧನ್ ಯೋಜನೆ, ಪ್ರಧಾನಮಂತ್ರಿ ಸುರಕ್ಷಾ ವಿಮಾ ಯೋಜನೆ, ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆಗಳ ಬಗ್ಗೆ ಈ ಸಂದರ್ಭದಲ್ಲಿ ಮಾಹಿತಿ ನೀಡಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ರವಿರಾಜ್ ಎಚ್.ಜಿ., ವಾರ್ತಾ ಸಹಾಯಕರಾದ ಡಿ.ಕೆ.ರಾಜರತ್ನ, ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಬಿ.ಎ.ಕೃಷ್ಣ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿರಾದಾರ ಶಂಕರ, ಆರೋಗ್ಯ ಮೇಲ್ವಿಚಾರಕರಾದ ಸತ್ಯನಾರಾಯಣ, ವಾರ್ತಾ ಇಲಾಖೆಯ ಸಿಬ್ಬಂದಿಗಳಾದ ವಿಶ್ವರಾಧ್ಯ ಎಸ್.ಹಂಗನಳ್ಳಿ, ಬಸಪ್ಪ ನಾಟೇಕಾರ, ಸಿದ್ದು ಎಸ್.ಲಾಡ್ಲಾಪುರ, ಹೈಯ್ಯಾಳಪ್ಪ ಸೇರಿದಂತೆ ಸಾರ್ವಜನಿಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...