ಸೋಮವಾರ, ಜನವರಿ 6, 2020

ಜಿಲ್ಲೆಯಾದ್ಯಂತ ಜನವರಿ ೬, ೭, ೮ರಂದು ಮತದಾರರ ಮಿಂಚಿನ ನೋಂದಣಿ
೧೮ ವರ್ಷ ಪೂರೈಸಿದ ಯುವಜನರು ನೋಂದಾಯಿಸಿ
-ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್
ಯಾದಗಿರಿ, ಜನವರಿ ೦೬ (ಕರ್ನಾಟಕ ವಾರ್ತೆ): ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಜನವರಿ ೬, ೭ ಮತ್ತು ೮ರಂದು ಮಿಂಚಿನ ನೋಂದಣಿ ಹಮ್ಮಿಕೊಳ್ಳಲಾಗಿದ್ದು, ಕರಡು ಮತದಾರರ ಪಟ್ಟಿಯಲ್ಲಿ ಇನ್ನೂ ಸೇರ್ಪಡೆಯಾಗದೆ ಇರುವ ಅರ್ಹ ಯುವಕ-ಯುವತಿಯರು, ನಾಗರಿಕರು ಹೆಸರು ನೋಂದಾಯಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಹೇಳಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಮಿಂಚಿನ ನೋಂದಣಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮತದಾರರ ನೋಂದಣಿ ಕುರಿತ ಭಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಿ, ಅವರು ಮಾತನಾಡಿದರು.
ಕಳೆದ ಜನವರಿ ೧ಕ್ಕೆ ೧೮ ವರ್ಷ ಪೂರೈಸಿದ ಯುವಕರು, ಯುವತಿಯರು ಅಥವಾ ಅರ್ಹ ಸಾರ್ವಜನಿಕರು ಹೊಸದಾಗಿ ಹೆಸರು ಸೇರ್ಪಡೆಗಾಗಿ ನಮೂನೆ-೬ರಲ್ಲಿ ಅರ್ಜಿ ಸಲ್ಲಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರಿದ್ದು ಅವರು ಸ್ಥಳಾಂತರ ಹೊಂದಿದಲ್ಲಿ, ಮೃತ ಹೊಂದಿದಲ್ಲಿ, ಹೆಸರು ಪುನರಾವರ್ತನೆಯಾಗಿದ್ದಲ್ಲಿ ಹೆಸರನ್ನು ತೆಗೆದು ಹಾಕಲು ನಮೂನೆ-೭ರಲ್ಲಿ, ಹೆಸರು ಇತ್ಯಾದಿ ತಿದ್ದುಪಡಿ ಬಯಸಿದಲ್ಲಿ ನಮೂನೆ-೮ರಲ್ಲಿ ಮತ್ತು ಹೆಸರು ವರ್ಗಾವಣೆ ಮಾಡಬೇಕಾದಲ್ಲಿ ನಮೂನೆ-೮ಎ ರಲ್ಲಿ ಸೂಕ್ತ ದಾಖಲೆಯೊಂದಿಗೆ ಅರ್ಜಿಗಳನ್ನು ಸಂಬAಧಪಟ್ಟ ಮತಗಟ್ಟೆ ಮಟ್ಟ ಅಧಿಕಾರಿ (ಬಿ.ಎಲ್.ಓ)ಗಳಿಗೆ ಸಲ್ಲಿಸಬಹುದು ಎಂದು ಅವರು ತಿಳಿಸಿದರು.
ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ಅರ್ಹತಾ ದಿನಾಂಕ: ೦೧-೦೧-೨೦೨೦ರಂತೆ ಪ್ರಕಟಿಸಿದ್ದು, ಕರಡು ಮತದಾರರ ಪಟ್ಟಿಯ ಬಗ್ಗೆ ಯಾವುದೇ ದೂರು, ಆಕ್ಷೇಪಣೆಗಳಿದ್ದಲ್ಲಿ ಜನವರಿ ೧೫ರ ವರೆಗೆ ಸಲ್ಲಿಸಬಹುದು. ಅಲ್ಲದೇ, ಜನವರಿ ೧೫ರ ವರೆಗೆ ಹೆಸರು ಮಾಡಿಕೊಳ್ಳಬಹುದು. ಈ ಅವಧಿಯಲ್ಲಿ ಸ್ವೀಕರಿಸಿದ ಹಕ್ಕು ಮತ್ತು ಆಕ್ಷೇಪಣೆಯ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ಜನವರಿ ೨೭ರಂದು ಕಾಲೋಚಿತಗೊಳಿಸಲಾಗುವುದು. ನಂತರ ಪುರವಣಿ ಪಟ್ಟಿಯನ್ನು ಫೆಬ್ರುವರಿ ೪ರಂದು ತಯಾರಿಸಿ, ಅಂತಿಮ ಮತದಾರರ ಪಟ್ಟಿಯನ್ನು ಫೆಬ್ರುವರಿ ೭ರಂದು ಪ್ರಕಟಿಸಲಾಗುವುದು ಎಂದು ಅವರು ವಿವರಿಸಿದರು.
ಮಿಂಚಿನ ನೋಂದಣಿಯಲ್ಲಿ ಹೆಸರು ಸೇರ್ಪಡೆ ಮಾಡಿಕೊಂಡ ಅಭ್ಯರ್ಥಿಗಳ ವಿವರವನ್ನು ಪ್ರತಿದಿನ ಚುನಾವಣಾ ಆಯೋಗಕ್ಕೆ ಕಳುಹಿಸಬೇಕು. ಲೋಕಸಭಾ, ನಗರ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯಿತಿ ಸೇರಿದಂತೆ ಎಲ್ಲಾ ಚುನಾವಣೆಗಳಿಗೂ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯೇ ಅನ್ವಯವಾಗುತ್ತದೆ. ಈ ವರ್ಷ ಗ್ರಾಮ ಪಂಚಾಯಿತಿ ಚುನಾವಣೆಗಳು ನಡೆಯುವ ಸಂಭವ ಇದೆ. ಹಾಗಾಗಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮಗಳಲ್ಲಿ ಹೆಚ್ಚಿನ ಪ್ರಚಾರ ನಡೆಸಿ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವAತೆ ಮನವಿ ಮಾಡಬೇಕು ಎಂದು ಅವರು ಸೂಚಸಿದರು.
 ಜಿಲ್ಲೆಯ ಪ್ರತಿಯೊಬ್ಬರು ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಪ್ರಕಟವಾದ ಬಗ್ಗೆ ಪರಿಶೀಲಿಸಿಕೊಳ್ಳಬೇಕು. ಕರಡು ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯ, ಯಾದಗಿರಿ ಸಹಾಯಕ ಆಯುಕ್ತರ ಕಾರ್ಯಾಲಯ, ಸುರಪುರ, ಶಹಾಪುರ, ಯಾದಗಿರಿ ತಹಶೀಲ್ದಾರರ ಕಾರ್ಯಾಲಯಗಳು ಹಾಗೂ ಜಿಲ್ಲೆಯ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳ ಕಾರ್ಯಾಲಯಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಅಲ್ಲದೇ, http://ceokarnataka.kar.nic.in  ಹಾಗೂ ಜಿಲ್ಲೆಯ yadgir.nic.in ಅಂತರ್ಜಾಲ ತಾಣದಲ್ಲಿ ಸಹ ಪರಿಶೀಲಿಸಬಹುದಾಗಿದೆ ಎಂದು ಅವರು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ, ತಹಶೀಲ್ದಾರರಾದ ಚನ್ನಮಲ್ಲಪ್ಪ ಘಂಟಿ, ಸಂಗಮೇಶ ಜಿಡಗೆ, ಚುನಾವಣೆ ಶಾಖೆಯ ಶಿರಸ್ತೇದಾರ್ ಪರಶುರಾಮ ಅವರು ಸಭೆಯಲ್ಲಿ ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...