ಬುಧವಾರ, ಫೆಬ್ರವರಿ 5, 2020


ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಟಿ.ಕೆ. ಅನಿಲ್‌ಕುಮಾರ್ ಸೂಚನೆ
ಕುಡಿಯುವ ನೀರಿನ ಕಾಮಗಾರಿಗಳಿಗೆ ವೇಗ ನೀಡಿ  

ಯಾದಗಿರಿ, ಫೆಬ್ರುವರಿ ೦೫ (ಕರ್ನಾಟಕ ವಾರ್ತೆ): ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೈಗೊಂಡಿರುವ ಕುಡಿಯುವ ನೀರಿನ ಕಾಮಗಾರಿಗಳಿಗೆ ವೇಗ ನೀಡಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಯಾವುದೇ ಗ್ರಾಮದಲ್ಲೂ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಾರದು ಎಂದು ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಟಿ.ಕೆ. ಅನಿಲ್‌ಕುಮಾರ್ ಅವರು ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಮಟ್ಟದ ಸಂಬAಧಪಟ್ಟ ಅಧಿಕಾರಿಗಳೊಂದಿಗೆ ನಡೆಸಿದ ಪ್ರಮುಖ ವಿಷಯಗಳ ಚರ್ಚಾ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯ ೩೮೬ ಶುದ್ಧ ಕುಡಿಯುವ ನೀರಿನ ಘಟಕಗಳ ಪೈಕಿ ೨೭೪ ಮಾತ್ರ ಕಾರ್ಯಾಚರಣೆ ಮಾಡುತ್ತಿವೆ. ಬಾಕಿ ೧೧೨ ಘಟಕಗಳು ಕಾರ್ಯಾಚರಣೆಯಲ್ಲಿಲ್ಲ. ಇಷ್ಟೊಂದು ಘಟಕಗಳು ಸ್ಥಗಿತಗೊಂಡಿದ್ದರೆ ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆ ಉಂಟಾಗಬಹುದು. ತಕ್ಷಣ ಇವುಗಳನ್ನು ಸರಿಪಡಿಸಬೇಕು. ಅದೇ ರೀತಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗಳ ಚಾಲ್ತಿಗೆ ಕೂಡ ಕ್ರಮ ಕೈಗೊಳ್ಳಬೇಕು ಎಂದು ಅವರು ನಿರ್ದೇಶಿಸಿದರು.

ನಗರ ಪ್ರದೇಶದಲ್ಲಿ ಕೈಗೊಂಡಿದ್ದ ೫೦೦ ಕಾಮಗಾರಿಗಳಲ್ಲಿ ೪೯೫ ಪೂರ್ಣಗೊಂಡಿವೆ. ಆದರೆ, ಆರ್ಥಿಕ ಪ್ರಗತಿ ಶೇ.೬೧.೩೦ರಷ್ಟಿದೆ. ಕಾಮಗಾರಿಗಳ ಭೌತಿಕ ಪ್ರಗತಿಗೆ ತಕ್ಕಂತೆ ಆರ್ಥಿಕ ಪ್ರಗತಿ ಸಾಧಿಸಬೇಕು. ಇನ್ನು ಜಿಲ್ಲೆಯಲ್ಲಿ ಪ್ರವಾಹ ಸಂದರ್ಭದಲ್ಲಿ ಉಂಟಾದ ರಸ್ತೆ ಮತ್ತು ಸೇತುವೆಗಳ ದುರಸ್ತಿಗೆ ಸಂಬAಧಿಸಿದ ಕಾಮಗಾರಿಗಳನ್ನು ಪಂಚಾಯತ್ ರಾಜ್ ಇಂಜಿನೀಯರಿAಗ್ ವಿಭಾಗ ಮತ್ತು ಲೋಕೋಪಯೋಗಿ ಇಲಾಖೆ ಇಂಜಿನೀಯರರು ಬರುವ ಮಾರ್ಚ್ ಅಂತ್ಯಕ್ಕೆ ಪೂರ್ಣಗೊಳಿಸಬೇಕು ಎಂದು ಅವರು ಸೂಚಿಸಿದರು. ಅಪೌಷ್ಟಿಕ ಮಕ್ಕಳ ಕಾಳಜಿ ವಹಿಸಿ: ಜಿಲ್ಲೆಯಲ್ಲಿ ಗುರುತಿಸಿರುವ ೪೫೬ ತೀವ್ರ ಅಪೌಷ್ಟಿಕ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಿ ಪ್ರತಿ ತಿಂಗಳು ಕಡ್ಡಾಯವಾಗಿ ಆರೋಗ್ಯ ತಪಾಸಣೆ ನಡೆಸಬೇಕು. ಇವರ ಜೊತೆಗೆ ಜಿಲ್ಲೆಯಲ್ಲಿರುವ ೨೪,೩೧೨ ಸಾಧಾರಣ ಅಪೌಷ್ಟಿಕ ಮಕ್ಕಳ ಪೌಷ್ಟಿಕ ಗುಣಮಟ್ಟ ಸುಧಾರಿಸಲು ಕ್ರಮ ಕೈಗೊಳ್ಳಬೇಕು. ಆರ್‌ಸಿಎಚ್ ವರದಿ ಸಂಖ್ಯೆಗನುಸಾರ ಗರ್ಭಿಣಿಯರನ್ನು ಪ್ರಧಾನಮಂತ್ರಿ ಮಾತೃವಂದನಾ ಹಾಗೂ ಮುಖ್ಯಮಂತ್ರಿ ಮಾತೃಶ್ರೀ ಯೋಜನೆಗಳ ಫಲಾನುಭವಿಗಳನ್ನಾಗಿಸಬೇಕು. ಈ ಯೋಜನೆಗಳಡಿಯಲ್ಲಿ ಅರ್ಹ ಫಲಾನುಭವಿಗಳ ನೋಂದಣಿಗೆ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು. ಆಯುಷ್ಮಾನ್ ಕಾರ್ಡ್ ನೋಂದಾಯಿಸಿ: ಆಯುಷ್ಮಾನ್ ಭಾರತ- ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲೆಯಲ್ಲಿ ಇದುವರೆಗೆ ೧.೪೪ ಲಕ್ಷ ಕಾರ್ಡ್ಗಳನ್ನು ಮಾತ್ರ ವಿತರಿಸಲಾಗಿದೆ. ಈ ಯೋಜನೆಯಡಿ ಬಿಪಿಎಲ್ ಕುಟುಂಬ ವರ್ಷದಲ್ಲಿ ೫ ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ಹಾಗೂ ಎಪಿಎಲ್ ಕುಟುಂಬ ೧.೫೦ ಲಕ್ಷ ರೂ.ವರೆಗೂ ಸಹಪಾವತಿಯೊಂದಿಗೆ ಚಿಕಿತ್ಸೆಯನ್ನು ಪಡೆಯಬಹುದಾಗಿದೆ. ಬಡವರ ಆರೋಗ್ಯ ರಕ್ಷಣೆಯಲ್ಲಿ ಈ ಯೋಜನೆ ಪ್ರಮುಖವಾಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸುವAತೆ ಅವರು ಸೂಚಿಸಿದರು. ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಮಾತನಾಡಿ, ಬೆಳೆ ಸಮೀಕ್ಷೆ ವಿವರ, ವಸತಿ ಯೋಜನೆ, ನಗರೋತ್ಥಾನ ಕಾಮಗಾರಿಗಳ ಪ್ರಗತಿ, ಜಲಾಮೃತ ಹಾಗೂ ಜಲಸಂವರ್ಧನೆ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಅವರು ಮಾತನಾಡಿ, ಮಹಾತ್ಮ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಜಿಲ್ಲೆಗೆ ನಿಗದಿಪಡಿಸಿದ ೨೬.೬೧ ಲಕ್ಷ ಮಾನವ ದಿನಗಳ ಗುರಿಯಲ್ಲಿ ಈಗಾಗಲೇ ೨೦.೪೫ ಲಕ್ಷ ಮಾನವ ದಿನಗಳನ್ನು ಪೂರ್ಣಗೊಳಿಸಿದ್ದು, ಶೇ.೭೬.೮೫ರಷ್ಟು ಸಾಧನೆ ಮಾಡಲಾಗಿದೆ ಎಂದು ತಿಳಿಸಿದರು. ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ಜಂಟಿ ಕೃಷಿ ನಿರ್ದೇಶಕರಾದ ಆರ್.ದೇವಿಕಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...