ಗುರುವಾರ, ಮಾರ್ಚ್ 19, 2020

ಕೊರೊನಾ ವೈರಸ್ ಕುರಿತು ಮಾಧ್ಯಮದವರಿಗೆ ಕಾರ್ಯಾಗಾರ
ನಿಖರ ವರದಿ ಪ್ರಸಾರಕ್ಕೆ ಜಿಲ್ಲಾಧಿಕಾರಿ ಮನವಿ
ಯಾದಗಿರಿ, ಮಾರ್ಚ್ 19 (ಕರ್ನಾಟಕ ವಾರ್ತೆ): ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕು ಹರಡದಂತೆ ಜಿಲ್ಲಾಡಳಿತವು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಮಾಧ್ಯಮದವರು ಸಂಬಂಧಪಟ್ಟ ಅಧಿಕಾರಿಗಳಿಂದ ನಿಖರ ಮಾಹಿತಿ ಪಡೆದು ಸುದ್ದಿ ಪ್ರಸಾರ ಮಾಡುವಂತೆ ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ವರು ತಿಳಿಸಿದರು.ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಾಧ್ಯಮದವರಿಗೆ ಹಮ್ಮಿಕೊಂಡಿದ್ದ ಕೊರೊನಾ ವೈರಸ್ ಜಾಗೃತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.ದೊಡ್ಡ ಸಭೆ-ಸಮಾರಂಭಗಳಲ್ಲಿ ಸಾರ್ವಜನಿಕರು ಭಾಗವಹಿಸದಂತೆ ಮನವಿ ಮಾಡಲಾಗಿದೆ. ಸಂತೆ ಮತ್ತು ಜಾತ್ರೆಯಲ್ಲಿ ಹೆಚ್ಚಿನ ಜನ ಸೇರುವುದರಿಂದ ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ತಿಳಿವಳಿಕೆ ನೀಡಿ ಸಂತೆ, ಜಾತ್ರೆಗಳನ್ನು ನಿಷೇಧಿಸಲಾಗುತ್ತಿದೆ. ದಿನನಿತ್ಯದ ಸಣ್ಣಪುಟ್ಟ ವಹಿವಾಟುಗಳಿಗೆ ಯಾವುದೇ ತೊಂದರೆ ಇಲ್ಲ. ಇದುವರೆಗೆ ವಿದೇಶದಿಂದ ಬಂದ 48 ಜನರಲ್ಲಿ ಸೋಂಕು ಇಲ್ಲ. ಮುಂಜಾಗ್ರತಾ ಕ್ರಮವಾಗಿ ಯಾದಗಿರಿ, ಶಹಾಪುರ ಹಾಗೂ ಸುರಪುರ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಒಟ್ಟು 27 ಐಸೊಲೇಷನ್ ಬೆಡ್‍ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಯಾದಗಿರಿ ನಗರದ ರೈಲ್ವೆ ನಿಲ್ದಾಣ, ಜಿಲ್ಲಾ ನ್ಯಾಯಾಲಯ, ಹೊಸ ಬಸ್ ನಿಲ್ದಾಣ ಹಾಗೂ ಯರಗೋಳ, ಗುರುಮಠಕಲ್ ಸಮೀಪದ ಇಟಗಾಲ್ ಕ್ರಾಸ್, ಮುಡಬೂಳ ಗ್ರಾಮಗಳಲ್ಲಿ ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಿ, ಸ್ಕ್ರೀನಿಂಗ್ ಮಾಡಲಾಗುತ್ತಿದೆ. ಅಲ್ಲದೇ, ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ಕೊರೋನಾ ವೈರಸ್ ಬಗ್ಗೆ ಜಾಗೃತಿ ಮೂಡಿಸಲು ಡಂಗೂರ ಸಾರಲಾಗುತ್ತಿದೆ. ರೋಗಲಕ್ಷಣಗಳು ಕಂಡುಬಂದಲ್ಲಿ 24*7 ಉಚಿತ ಆರೋಗ್ಯ ಸಹಾಯವಾಣಿ 104 ಅಥವಾ ಜಿಲ್ಲಾಡಳಿತದ ಸಹಾಯವಾಣಿ ಸಂಖ್ಯೆ 08473-253950 ಕರೆ ಮಾಡಲು ಅವರು ಮನವಿ ಮಾಡಿದರು.ದೀರ್ಘ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರ ಗಂಟಲು ದ್ರವ್ಯ ಮಾದರಿಯನ್ನು ಜಿಲ್ಲೆಯಿಂದ ಕೊರೊನಾ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಆದರೆ, ಇವರು ವಿದೇಶದಿಂದ ಬಂದವರಲ್ಲ. ಇವರಿಗೆ ಜಿಲ್ಲಾಸ್ಪತ್ರೆಯ ಐಸೊಲೇಷನ್ ವಾರ್ಡ್‍ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಋಷಿಕೇಶ ಭಗವಾನ್ ಸೋನವಣೆ ಅವರು ಮಾತನಾಡಿ, ಸಾರ್ವಜನಿಕರಲ್ಲಿ ಕೊರೊನಾ ವೈರಸ್ ಕುರಿತಂತೆ ಸುಳ್ಳು ವದಂತಿಗಳನ್ನು ಹರಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿ: ವಿಶ್ವ ಆರೋಗ್ಯ ಸಂಸ್ಥೆಯ ಕಲಬುರಗಿ ವಿಭಾಗಮಟ್ಟದ ವೈದ್ಯಕೀಯ ಸರ್ವೇಕ್ಷಣಾಧಿಕಾರಿ ಡಾ.ಅನಿಲ್‍ಕುಮಾರ್ ಎಸ್.ತಾಳಿಕೋಟಿ ಅವರು ಮಾತನಾಡಿ, ಕೆಮ್ಮು, ನೆಗಡಿ, ಜ್ವರ, ಉಸಿರಾಟದ ತೊಂದರೆ ಇರುವವರೆಲ್ಲರೂ ಕೊರೊನಾ ವೈರಸ್ ಶಂಕಿತ ಅಥವಾ ವೈರಸ್ ತಗುಲಿದ ರೋಗಿಗಳಲ್ಲ. ಪ್ರತಿಯೊಬ್ಬರೂ ತಮ್ಮ ಕೈಗಳನ್ನು ಸ್ವಚ್ಛವಾಗಿಟ್ಟುಕೊಂಡು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿದರೆ ರೋಗ ಹರಡುವುದಿಲ್ಲ. ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿದೆ ಎಂದು ಹೇಳಿದರು.ಪ್ರತಿಯೊಬ್ಬರೂ ಮಾಸ್ಕ್ ಬಳಸುವ ಅಗತ್ಯವಿಲ್ಲ. ಒಂದು ಮಾಸ್ಕ್ ಕೇವಲ 8 ಗಂಟೆ ಉಪಯೋಗಿಸಬಹುದು. ಮಾಸ್ಕ್ ರೋಗ ಹರಡುವುದನ್ನು ತಡೆಗಟ್ಟುತ್ತದೆ ಎನ್ನುವುದು ಸುಳ್ಳು. ಸೋಂಕಿತ ವ್ಯಕ್ತಿಯು ಸೀನಿದಾಗ, ಕೆಮ್ಮಿದಾಗ, ಅವರ ಜೊತೆ ನಿಕಟ ಸಂಪರ್ಕದಲ್ಲಿರುವಾಗ, ಹಸ್ತಲಾಘವ ಅಥವಾ ಮುಟ್ಟಿದಾಗ, ಸೋಂಕಿತ ವ್ಯಕ್ತಿಯು ಬಳಸಿದ ವಸ್ತುಗಳನ್ನು ಯಾವುದೇ ರಕ್ಷಣೆ ಇಲ್ಲದೆ ಬಳಸಿದಾಗ, ಸ್ವಚ್ಛಗೊಳಿಸದ ಕೈಗಳಿಂದ ಕಣ್ಣು, ಮೂಗು, ಬಾಯಿಯನ್ನು ಮುಟ್ಟಿಕೊಳ್ಳುವುದರಿಂದ ಕೊರೊನಾ ಹರಡುತ್ತದೆ ಎಂದು ಅವರು ತಿಳಿಸಿದರು.
ಕೆಮ್ಮು, ನೆಗಡಿ, ಜ್ವರ, ಉಸಿರಾಟದ ತೊಂದರೆ ಇರುವ ಎಲ್ಲರಿಗೂ ಕೊರೊನಾ ಟೆಸ್ಟ್ ಮಾಡುವುದಿಲ್ಲ. ಸರ್ಕಾರದ ನಿರ್ದೇಶನದನ್ವಯ ಶಿಷ್ಟಾಚಾರ ಪ್ರಕಾರ ಪರೀಕ್ಷೆ ನಡೆಸಲಾಗುವುದು. ಮುಖ್ಯವಾಗಿ ವಿದೇಶದಿಂದ ಬಂದವರನ್ನು 14 ದಿನಗಳವರೆಗೆ ಹೋಮ್ ಐಸೊಲೇಷನ್‍ನಲ್ಲಿಟ್ಟು ನಿಗಾವಹಿಸಲಾಗುವುದು. ಈ ಸಂದರ್ಭದಲ್ಲಿ ಅವರಲ್ಲಿ ರೋಗಲಕ್ಷಣಗಳು ಕಂಡುಬಂದಲ್ಲಿ ಕೊರೊನಾ ಟೆಸ್ಟ್‍ಗೆ ಕಳುಹಿಸಲಾಗುವುದು. ಸೋಂಕಿತ ವ್ಯಕ್ತಿಯಿಂದ ಮತ್ತೊಬ್ಬ ವ್ಯಕ್ತಿಯ ಶರೀರದಲ್ಲಿ ವೈರಸ್ ಸೇರಿದಾಗ ರೋಗಲಕ್ಷಣ ಕಂಡುಬರಲು 2ರಿಂದ 14 ದಿನ ಬೇಕು ಎಂದು ಅವರು ಮಾಹಿತಿ ನೀಡಿದರು.ಜಿಲ್ಲೆಯಲ್ಲಿ ಇಲ್ಲಿಯವರೆಗೆ ಯಾವುದೇ ಶಂಕಿತ ಅಥವಾ ಖಚಿತ ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿರುವುದಿಲ್ಲ. ಕೊರೊನಾ ವೈರಸ್ ಹೊರಗಡೆ 12ರಿಂದ 48 ಗಂಟೆ ಬದುಕುತ್ತದೆ. ಮಾತನಾಡುವಾಗ, ಕೆಮ್ಮುವಾಗ ಅಂತರ ಕಾಯ್ದುಕೊಳ್ಳಬೇಕು. ಆಗಾಗ ಸೋಪು ಮತ್ತು ನೀರಿನಿಂದ ಕೈ ತೊಳೆದುಕೊಳ್ಳಬೇಕು. ವಿದೇಶದಿಂದ ಬಂದವರ ಬಗ್ಗೆ ಆತಂಕ ಪಡುವ ಬದಲು ಸಮೀಪದ ಅಂಗನವಾಡಿ ಅಥವಾ ಆಶಾ ಕಾರ್ಯಕರ್ತೆಯರಿಗೆ ಮಾಹಿತಿ ನೀಡಲು ಅವರು ಸಲಹೆ ನೀಡಿದರು.27 ಡಿಗ್ರಿ ಸೆಲ್ಸಿಯಸ್‍ಗಿಂತ ಹೆಚ್ಚಿನ ತಾಪಮಾನದಲ್ಲಿ ಕೊರೊನಾ ವೈರಸ್ ಬದುಕುವುದಿಲ್ಲ ಎನ್ನುವುದಕ್ಕೆ ಯಾವುದೇ ಆಧಾರವಿಲ್ಲ. ಕಳೆದ ಜನವರಿ 7ರಂದು ನೊವೆಲ್ ಕೊರೊನಾ ವೈರಸ್ ಜನ್ಮ ತಾಳಿದ್ದು, ಅದರ ವರ್ತನೆ ಬಗ್ಗೆ ನಿಖರ ಮಾಹಿತಿ ಇಲ್ಲ. ಈ ಬಗ್ಗೆ ಸಂಶೋಧನೆಗಳು ನಡೆಯುತ್ತಿದ್ದು, ಜನರು ವದಂತಿಗಳಿಗೆ ಕಿವಿಗೊಡಬಾರದು. ಈ ರೋಗಕ್ಕೆ ನಿಖರವಾದ ಚಿಕಿತ್ಸೆ ಇರುವುದಿಲ್ಲ. ರೋಗದ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿಲ್ಪಾ ಶರ್ಮಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎಸ್.ಪಾಟೀಲ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ವಿವೇಕಾನಂದ ಟೆಂಗೆ, ಶಹಾಪುರ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಮೇಶ್ ಅವರು ಉಪಸ್ಥಿತರಿದ್ದರು

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...