ಗುರುವಾರ, ಮಾರ್ಚ್ 26, 2020

ಹೋಮ್ ಐಸೊಲೇಷನ್‍ನಲ್ಲಿ 64 ಜನ
3 ವ್ಯಕ್ತಿಗಳ ಮಾದರಿಗಳಲ್ಲಿ 2 ನೆಗೆಟಿವ್
ಯಾದಗಿರಿ, ಮಾರ್ಚ್ 26 (ಕರ್ನಾಟಕ ವಾರ್ತೆ): ನೋವೆಲ್ ಕೊರೊನಾ ವೈರಸ್‍ಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಪರೀಕ್ಷೆ ಮಾಡಲು ಸಂಗ್ರಹಿಸಿದ ಒಟ್ಟು 3 ವ್ಯಕ್ತಿಗಳ ಮಾದರಿಗಳಲ್ಲಿ 2 ನೆಗೆಟಿವ್ ಫಲಿತಾಂಶ ಬಂದಿವೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕುರಿತು ಗುರುವಾರ ಸಂಜೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲಾ ಆಸ್ಪತ್ರೆಯಲ್ಲಿ ಒಬ್ಬರನ್ನು ಮತ್ತು ಸುರಪುರ ಆಸ್ಪತ್ರೆಯಲ್ಲಿ ಒಬ್ಬರನ್ನು ಪ್ರತ್ಯೇಕವಾಗಿರಿಸಿ, ಐಸೊಲೇಷನ್ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಶಂಕಿತ ಅಥವಾ ಖಚಿತ ಕೊರೊನಾ ವೈರಸ್ ಪ್ರಕರಣ ಪತ್ತೆಯಾಗಿರುವುದಿಲ್ಲ. ಜಿಲ್ಲಾಡಳಿತವು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಆತಂಕಪಡಬಾರದು ಮನವಿ ಮಾಡಿದ್ದಾರೆ.
ಯಾದಗಿರಿ ತಾಲ್ಲೂಕಿನಲ್ಲಿ 27, ಶಹಾಪೂರ ತಾಲ್ಲೂಕಿನಲ್ಲಿ 16 ಹಾಗೂ ಸುರಪುರ ತಾಲ್ಲೂಕಿನಲ್ಲಿ 21 ಸೇರಿದಂತೆ ಮಾರ್ಚ್ 26ರವರೆಗೆ ಜಿಲ್ಲೆಯಲ್ಲಿ ಒಟ್ಟು 64 ಜನ ದುಬೈ, ಕತಾರ, ಸೌದಿ, ಮದಿನಾ ಪ್ರವಾಸದಿಂದ ಜಿಲ್ಲೆಗೆ ಮರಳಿ ಬಂದಿರುವ ಹಿನ್ನೆಲೆಯಲ್ಲಿ ಇವರನ್ನು ವೈದ್ಯಕೀಯ ತಪಾಸಣೆಗೊಳಪಡಿಸಲಾಗಿದೆ. ಯಾವುದೇ ರೋಗಲಕ್ಷಣಗಳು ಕಂಡುಬಂದಿರುವುದಿಲ್ಲ. ಕಾರಣ ಇವರಿಗೆ ಹೋಮ್ ಐಸೊಲೇಷನ್ ವ್ಯವಸ್ಥೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ವಿದೇಶಗಳಿಂದ ಬಂದವರನ್ನು ದಿನಕ್ಕೆ 2 ಬಾರಿಯಂತೆ 14 ದಿನಗಳ ಕಾಲ ವೈದ್ಯಕೀಯ ತಂಡ ಭೇಟಿ ನೀಡಿ ತಪಾಸಣೆ ನಡೆಸುತ್ತಿದೆ. ಇವರ ಕುಟುಂಬದ ಸದಸ್ಯರ ಮೇಲೆಯೂ ನಿಗಾವಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಯಾದಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ 15, ಶಹಾಪುರ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ 2 ಹಾಗೂ ಸುರಪುರ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ 10 ಸೇರಿದಂತೆ ಒಟ್ಟು 27 ಐಸೊಲೇಷನ್ ಬೆಡ್‍ಗಳ ವ್ಯವಸ್ಥೆ ಮಾಡಲಾಗಿದೆ. ಆರೋಗ್ಯ ಸಹಾಯವಾಣಿ-104 ಕ್ಕೆ ಬರುವ ಕರೆಗಳಿಗಾಗಿ 3 ಸಿಬ್ಬಂದಿಗಳನ್ನು ಮೀಸಲಿರಿಸಿದೆ. ಜಿಲ್ಲಾಡಳಿತದ ಕಂಟ್ರೋಲ್ ರೂಮ್ ಸಹಾಯವಾಣಿ ಸಂಖ್ಯೆ 08473-253950 ಗೆ 11 ಕರೆಗಳು ಸ್ವೀಕೃತವಾಗಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಸಾರ್ವಜನಿಕರಿಗೆ ಮನವಿ: ಕೋವಿಡ್-19 ಪೀಡಿತ ದೇಶಗಳಿಂದ ಹಿಂತಿರುಗಿರುವ ಅಥವಾ ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿರುವ ಯಾರಾದರು ಭಾರತಕ್ಕೆ ಹಿಂತಿರುಗಿದ ದಿನದಿಂದ 14 ದಿನಗಳವರೆಗೆ ರೋಗ ಲಕ್ಷಣಗಳು ಇರಲಿ ಅಥವಾ ಇಲ್ಲದಿರಲಿ ಮನೆಯಲ್ಲಿ ಪ್ರತ್ಯೇಕವಾಗಿರಬೇಕು ಹಾಗೂ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ವರದಿ ಮಾಡಿಕೊಳ್ಳಬೇಕು. ಜಿಲ್ಲಾಡಳಿತದ ಕಂಟ್ರೋಲ್ ರೂಮ್ ಸಹಾಯವಾಣಿ ಸಂಖ್ಯೆ 08473-253950 ಅಥವಾ 24*7 ಉಚಿತ ಆರೋಗ್ಯ ಸಹಾಯವಾಣಿ 104ಕ್ಕೆ ಕರೆ ಮಾಡಬಹುದು ಎಂದು ಅವರು ತಿಳಿಸಿದ್ದಾರೆ.
ಸಾರ್ವಜನಿಕರು ವೈಯಕ್ತಿಕ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಕೆಮ್ಮುವಾಗ ಅಥವಾ ಸೀನುವಾಗ ಕರವಸ್ತ್ರ/ಟಿಶ್ಯೂ ಪೇಪರನ್ನು ಬಳಸಿ. ಕೈ ಸ್ವಚ್ಛಗೊಳಿಸುವ ದ್ರಾವಣ ಅಥವಾ ನೀರು ಮತ್ತು ಸೋಪು ಬಳಸಿ ಆಗಾಗ ಕೈಗಳನ್ನು ತೊಳೆದುಕೊಳ್ಳಿ ಮತ್ತು ಸಾಮಾಜಿಕ ಸಮೂಹ ಗುಂಪು ಸೇರುವುದನ್ನು ಮಾಡಬಾರದು ಎಂದು ಅವರು ಸಲಹೆ ನೀಡಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...