ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಿ ಗುರಿ ಸಾಧಿಸಿ : ಜಿಲ್ಲಾಧಿಕಾರಿ ಡಾ.ಸುಶೀಲ ಬಿ
ಯಾದಗಿರಿ: ಆಗಸ್ಟ್, 28 ( ಕ. ವಾ) : ಕೆಕೆಆರ್ಡಿಬಿ, ಶಾಸಕರ, ಸಂಸದರ, ಎಮ್ಎಲ್ಸಿ ನಿಧಿಯಡಿ ಮತ್ತು ಗಡಿನಾಡು ಪ್ರದೇಶ ಅಭಿವೃದ್ದಿ ಮಂಡಳಿ ಅನುದಾನದಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳಡಿ ಅನುಷ್ಠಾನದಲ್ಲಿರುವ ಕಾಮಗಾರಿಗಳನ್ನು ಶೀಘ್ರವಾಗಿ ಕಾರ್ಯನಿರ್ವಹಿಸುವ ಮೂಲಕ ನಿಗದಿತ ಗುರಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಸುಶೀಲ ಬಿ. ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರದಂದು ನಡೆದ ಕೆಕೆಆರ್ಡಿಬಿ, ಶಾಸಕರ, ಸಂಸದರ, ಎಮ್ಎಲ್ಸಿ ನಿಧಿಯಡಿ ಮತ್ತು ಗಡಿನಾಡು ಪ್ರದೇಶ ಅಭಿವೃದ್ದಿ ಮಂಡಳಿಗಳಿಂದ ನಿಗದಿಪಡಿಸಲಾದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ನಿರ್ಮಿತಿ ಕೇಂದ್ರ, ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಇಲಾಖೆ, ಕೆಆರ್ಐಡಿಎಲ್ ಇಲಾಖೆಯ ಅಧಿಕಾರಿಗಳಿಗೆ ಕಾಮಗಾರಿಗಳನ್ನು ಶೀಘ್ರವೇ ಮುಗಿಸಿ ಅಭಿವೃದ್ಧಿಗೆ ನೆರವಾಗಬೇಕು ಎಂದು ಸೂಚಿಸಿದರು.
ಕಳೆದ ಸಾಲಿನಲ್ಲಿ ಅನುಮೋದನೆಗೊಂಡ ಕಾಮಗಾರಿಗಳ ಅಂದಾಜು ಪಟ್ಟಿಗಳನ್ನು ಸಲ್ಲಿಸಿ ಆಡಳಿತಾತ್ಮಕ ಅನುಮೋದನೆ ಪಡೆದು ಕಾಮಗಾರಿಗಳನ್ನು ಪ್ರಾರಂಭಿಸಿ ತ್ವರಿತವಾಗಿ ಪೂರ್ಣಗೊಳಿಸಲು ಸಂಬಂಧಿಸಿದ ಅನುಷ್ಠಾನ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ಮೆಗಾ ಮ್ಯಾಕ್ರೋ ಯೋಜನೆಯಡಿ ತೋಟಗಾರಿಕೆ ಇಲಾಖೆಯ, ಲೋಕೋಪಯೋಗಿ ಇಲಾಖೆಯ, ಪಂಚಾಯತ ರಾಜ್ ಇಲಾಖೆಯ , ಆರೋಗ್ಯ ಇಲಾಖೆಯ ಸಂಬಂಧಿಸಿದ ಕಾಮಗಾರಿಗಳು ಪ್ರಾರಂಭಿಸಬೇಕಾಗಿದ್ದು, ಇನ್ನೂ ಪ್ರಾರಂಭವಾಗದೇ ಇರುವ ಕುರಿತು ಸಂಬಂಧಪಟ್ಟ ಅನುಷ್ಠಾನ ಅಧಿಕಾರಿಗಳಿಂದ ಮಾಹಿತಿ ಪಡೆದು ಈ ಕಾಮಗಾರಿಗಳನ್ನು ಶೀಘ್ರದಲ್ಲೇ ಪ್ರಾರಂಭಿಸುವಂತೆ ಕ್ರಮವಹಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಮಂಡಳಿಯ ವತಿಯಿಂದ ಅನುಮೋದನೆಗೊಂಡ ಶಾಲಾ ಕಟ್ಟಡಗಳು, ಅಂಗನವಾಡಿ ಕಟ್ಟಡಗಳು, ಆರೋಗ್ಯ ಕೇಂದ್ರಗಳ ಕಟ್ಟಡಗಳನ್ನು ಆದ್ಯತೆಯ ಮೇರೆಗೆ ಪ್ರಾರಂಭಿಸಿ ಶೀಘ್ರದಲ್ಲಿಯೇ ಪೂರ್ಣಗೊಳಿಸಬೇಕು ಎಂದರು.
ಸ್ಥಳ ಸಮಸ್ಯೆ ಇರುವ ಶಾಲಾ ಹಾಗೂ ಅಂಗನವಾಡಿ ಕಟ್ಟಡಗಳ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ಮತ್ತು ಡಿಡಿಪಿಐ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರುವುದರ ಮೂಲಕ ಸಮಸ್ಯೆಗಳನ್ನು ಇತ್ಯರ್ಥಪಡಿಸಿ. ಪ್ರತಿ ಮಾಹೆಗೆ ನಿಗದಿಪಡಿಸಲಾದ ಆರ್ಥಿಕ ಗುರಿಗೆ ತಕ್ಕಂತೆ ಪ್ರಗತಿ ಸಾಧಿಸಲು ಎಲ್ಲಾ ಅನುಷ್ಠಾನ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಸಿಪಿಓ ಕುಮುಲಯ್ಯ ಕೆ, ಪಿಡಬ್ಲ್ಯೂಡಿ ಇಲಾಖೆ ಎಇಇ ಅಭಿಮನ್ಯು, ನಿರ್ಮೀತಿ ಕೇಂದ್ರದ ಅಧಿಕಾರಿ ಕಿರಣಕುಮಾರ, ಡಿಡಿಪಿಐ ಮಂಜುನಾಥ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೀರನಗೌಡ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಗಂಗಾಧರ ದೊಡ್ಮನಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ